ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ.
Cnewstv / 01.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ.
ಶಿವಮೊಗ್ಗ : ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವವನ್ನು 2023ರ ಜನವರಿ 6, 7 ಮತ್ತು 08ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಯೋಜಿತ ಕಾರ್ಯಕ್ರಮವು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತವು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆಯನ್ನು ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಉತ್ತಮ ವೇದಿಕೆ ಇದಾಗಿರಲಿದ್ದು, ಶಾಲಾ ಹಂತದಲ್ಲಿ ಹೆಚ್ಚು ಮಕ್ಕಳು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕಾದ ಅಗತ್ಯವಿದೆ ಎಂದರು.ವೈಯಕ್ತಿಕ ವಿಭಾಗದಲ್ಲಿ ಹಾಗು ಸಾಮೂಹಿಕ ವೇದಿಕೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಡಿ.ವಿ.ಎಸ್. ಶಾಲಾ ಕಟ್ಟಡದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಲಾದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1800ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ(ಎಂಟರಿಂದ ಹತ್ತನೆ ಇಯತ್ತೆಯವರೆಗೆ) ಹಾಗೂ ಸಾಮೂಹಿ ವಿಭಾಗದಲ್ಲಿ (ಎಂಟರಿಂದ ಹನ್ನೆರಡನೇ ಇಯತ್ತೆಯವರೆಗೆ) ಭಾಗವಹಿಸಲಿದ್ದಾರೆ. ಇವರೊಂದಿಗೆ 300ಕ್ಕೂ ಹೆಚ್ಚಿನ ತೀರ್ಪುಗಾರರು, 200ಕ್ಕೂ ಹೆಚ್ಚಿನ ಸ್ವಯಂ ಸೇವಕರನ್ನು ನಿಯೋಜಿಸಲಾಗುವುದು ಎಂದ ಅವರು, ಅದರ ಯಶಸ್ಸಿಗಾಗಿ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಲಾಗುವುದು ಎಂದರು.
ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಕ್ರೀಡಾಪಟುಗಳಿಗೆ ಉತ್ತಮ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಈ ಕ್ರೀಡಾಕೂಟದ ಯಶಸ್ವಿಗೆ ಸ್ವಾಗತ ಸಮಿತಿ, ಆಹಾರ ಸಮಿತಿ, ಕ್ರಿಯಾ ಸಮಿತಿ, ಸುರಕ್ಷತೆ ಮತ್ತು ರಕ್ಷಣಾ ಸಮಿತಿ, ಶಿಸ್ತುಪಾಲನಾ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅದರ ಉಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದರು.
ಶಿಷ್ಟಾಚಾರದಂತೆ ಈ ಕಾರ್ಯಕ್ರಮದ ಉದ್ಘಾಟನೆಗೆ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದರು. ಕಾರ್ಯಕ್ರಮಗಳು ನಡೆಯುವ ದಿನಗಳಂದು ಸಂಜೆ ವಿಶೇಷ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದೆಂದವರು ನುಡಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ : ಡಾ|| ಆರ್.ಸೆಲ್ವಮಣಿ. 2022-12-01
Recent Comments