Cnewstv / 01.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮನೀಷ್ ಸಿಸೋಡಿಯಾ ಬಂಧನ ಖಂಡಿಸಿ, ಎಎಪಿಯಿಂದ ಪ್ರತಿಭಟನೆ.
ಶಿವಮೊಗ್ಗ: ದೆಹಲಿ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.
ದೇಶಾದ್ಯಂತ ಆಮ್ ಆದ್ಮಿ ಪಕ್ಷ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿ ಪಕ್ಷ ಸಿಸೋಡಿಯಾ ಅವರನ್ನು ಬಂಧಿಸಿದೆ. ದೆಹಲಿ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ನೂತನ ಅಬಕಾರಿ ನೀತಿ ಇನ್ನೂ ದೆಹಲಿಯಲ್ಲಿ ಜಾರಿಗೆ ಬಂದಿಲ್ಲ. ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ ಎಂಬುದನ್ನು ಗಮನಿಸಬೇಕು ಎಂದು ತಿಳಿಸಿದರು.
ಸುಮಾರು ಒಂದು ವರ್ಷದಿಂದ ಸಿಸೋಡಿಯಾ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಆದರೆ ಈವರೆಗೂ ಆರೋಪ ಸಾಬೀತುಪಡಿಸುವ ಯಾವುದೇ ಸಾಕ್ಷö್ಯ ಸಿಕ್ಕಿಲ್ಲ. ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್ ಆದ್ಮಿ ಪಕ್ಷ ಒಂದೇ ಬಿಜೆಪಿ ಎದುರಿಗೆ ಇರುವ ಏಕೈಕ ಪ್ರಬಲ ಶಕ್ತಿ ಎಂಬುದು ಅವರಿಗೆ ಅರಿವಾಗಿದೆ. ಅದನ್ನು ರಾಜಕೀಯವಾಗಿ ಎದುರಿಸಲು ಆಗದೆ, ಅಧಿಕಾರ ದುರ್ಬಳಕೆ ಮಾಡಿಕೊಂಡು ಈ ರೀತಿ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಮ್ ಆದ್ಮಿ ಪಕ್ಷ ಪ್ರವರ್ಧಮಾನಕ್ಕೆ ಬರುತ್ತಿದೆ. ಜನರು ಎಎಪಿ ಪರವಾಗಿ ಇರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಸಿಸೋಡಿಯಾ ಆಗಮಿಸಿ, ಇಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಪ್ರಶ್ನಿಸಬಹುದು ಎಂಬ ಭಯದಿಂದ ಕೇಂದ್ರ ಸರ್ಕಾರ ಸಿಬಿಐ ಮೂಲಕ ಅವರನ್ನು ಬಂಧಿಸಿದೆ. ದೇಶ ಹಾಗೂ ಜನರಿಗೋಸ್ಕರ ಪ್ರಾಣ ನೀಡಲು ನಾವು ಸಿದ್ಧ ಎಂದು ಸವಾಲು ಹಾಕಿದರು. ಶಿಕ್ಷಣ ಸಚಿವರಾಗಿ ಸಿಸೋಡಿಯಾ 25,000ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ಅತ್ಯಾಧುನಿಕವಾಗಿ ನಿರ್ಮಿಸಿದ್ದಾರೆ. 20 ಲಕ್ಷ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತಹವರ ವಿರುದ್ಧ ಬಿಜೆಪಿ ಕುತಂತ್ರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಕಿರಣ್, ಪ್ರಮುಖರಾದ ಬಿ.ಆರ್. ಮನೋಹರ ಗೌಡ, ನೇತ್ರಾವತಿ, ಸಮೀನ ಕೌಸರ್, ಪುಷ್ಪಲತಾ, ಸುರೇಶ್, ನಜೀರ್ ಅಹ್ಮದ್, ಶಿವಕುಮಾರ್ ಇನ್ನಿತರರು ಇದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv