Breaking News

ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ನ್ಯಾಯಾಲಯದ ಮೊರೆ ಹೋದ ಶೈಲಜಾ ವಿಜಯನ್

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಅಧ್ಯಕ್ಷೆ ಶೈಲಜಾ ವಿಜಯನ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ದೇಶಾದ್ಯಂತ ಭಕ್ತರು ಪ್ರತಿಭಟನೆ ನಡೆಸುತ್ತಿದ್ದು, ಈ ಮಧ್ಯೆ ಕೇರಳದ ಎಲ್ ಡಿಎಫ್ ಸರ್ಕಾರ ಸುಪ್ರೀಂ ಕೋರ್ಟ್ ಆದೇಶಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಹೇಳಿದ ನಂತರ ಪ್ರತಿಭಟನೆ ತೀವ್ರವಾಗಿದೆ.ಈ ಸಂಬಂಧ ಶೈಲಜಾ ವಿಜಯನ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಎಲ್ಲಾ ವಯಸ್ಸಿನ ಮಹಿಳೆಯರು ಅಯ್ಯಪ್ಪ ದೇವಸ್ಥಾನ ಪ್ರವೇಶಿಸಬಹುದು ಎಂಬ ತೀರ್ಪು ಸಂಪೂರ್ಣವಾಗಿ ಅಸಮರ್ಥನೀಯವಾಗಿದ್ದು ವಿವೇಚನಾರಹಿತವಾಗಿದೆ ಮತ್ತು ತೀರ್ಪಿನಲ್ಲಿ ಸ್ಪಷ್ಟತೆಯಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕರೆದಿದ್ದ ಸಭೆಗೆ ಹೋಗಲು ಪಂಡಲಮ್ ಪ್ಯಾಲೆಸ್ ಮತ್ತು ಶಬರಿಮಲೆ ದೇವಸ್ಥಾನದ ಅರ್ಚಕರು ನಿರಾಕರಿಸಿದ್ದಾರೆ. ಪ್ಯಾಲೆಸ್ ಟ್ರಸ್ಟ್ ಸುಪ್ರೀಂ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಿದೆ.ಶೈಲಜಾ ವಿಜಯನ್ ಸಲ್ಲಿಸಿರುವ ಮನವಿ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್, ಸುಪ್ರೀಂ ಕೋರ್ಟ್ ನ ತೀರ್ಪನ್ನು ಜಾರಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ವಿಚಾರದಲ್ಲಿ ಭಕ್ತರ ಜೊತೆ ಚರ್ಚೆ ಮಾಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದ್ದಾರೆ. ಜನರ ನಂಬಿಕೆ, ಭಾವನೆಗಳ ಜೊತೆ ಹೋರಾಡಲು ಇದು ಸರ್ಕಾರದ ತೀರ್ಮಾನವಲ್ಲ, ಅಯ್ಯಪ್ಪ ಸ್ವಾಮಿಯ ಭಕ್ತರ ಹಿತಾಸಕ್ತಿಯನ್ನು ರಕ್ಷಿಸಲಾಗುವುದು. ಸರ್ಕಾರ ಮಾತುಕತೆಗೆ ಸದಾ ಸಿದ್ದವಿದೆ ಎಂದು ಹೇಳಿದ್ದಾರೆ. ಈ ಮಧ್ಯೆ, ಸಾವಿರಾರು ವರ್ಷಗಳಿಂದ ಬಂದ ಸಂಪ್ರದಾಯವನ್ನು ಮುರಿಯಬಾರದು ಎಂದು ಅಯ್ಯಪ್ಪ ದೇವರ ಭಕ್ತರು ಚೆನ್ನೈಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇರಳ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.. ಕಳೆದ ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ 10ರಿಂದ 50 ವರ್ಷದೊಳಗಿನ ಮಹಿಳೆಯರು ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಲು ಅನುಮತಿ ನೀಡಿ ತೀರ್ಪು ನೀಡಿತ್ತು.

Leave a Reply

Your email address will not be published. Required fields are marked *

*