Breaking News

ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ..

Cnewstv / 13.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ..

ಶಿವಮೊಗ್ಗ: ಪರಿಸರವನ್ನು ಸರ್ವನಾಶ ಮಾಡುತ್ತಿರುವ ಶಾಹಿ ಗಾರ್ಮೆಂಟ್ಸ್ ವಿರುದ್ಧ ಇಂದು ಆಕ್ರೋಶ ಭುಗಿಲೆದ್ದಿದೆ.
ಮಾಚೇನಹಳ್ಳಿಯಲ್ಲಿರುವ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ವಿರುದ್ಧ ರೈತ ಮುಖಂಡರು, ಸುತ್ತಮುತ್ತಲಿನ ನೊಂದ ಸಂತ್ರಸ್ತರು, ಸಣ್ಣ ಕೈಗಾರಿಕೆ ಉದ್ದಿಮೆದಾರರು, ಸಾರ್ವಜನಿಕರು ಕಾರ್ಖಾನೆ ಮುಂಭಾಗದ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಶಾಹಿ ಗಾರ್ಮೆಂಟ್ಸ್ ವಿರುದ್ಧ ಧಿಕ್ಕಾರ ಕೂಗಿದರು.

ಶಾಹಿ ಗಾರ್ಮೆಂಟ್ಸ್ ಮಾಲೀಕರನ್ನು ಬಂಧಿಸಬೇಕು. ರೈತ ಬೆಳೆಯನ್ನು ಉಳಿಸಬೇಕು. ಕಾರ್ಮಿಕರ ಆರೋಗ್ಯ ಕಾಪಾಡಬೇಕು. ನಮಗೆ ನ್ಯಾಯ ಸಿಗಬೇಕು ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು.

ಕಳೆದ ೧೦ ವರ್ಷಗಳಿಂದ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯ ಚಿಮಣಿಯಿಂದ ಹೊರಬರುತ್ತಿರುವ ರಾಸಾಯನಿಕ ಮಿಶ್ರಿತ ಧೂಳು ಮತ್ತು ಬಟ್ಟೆಗಳಿಗೆ ಅಳವಡಿಸುವ ಕಲರ್ ಡೈನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಕಾರ್ಖಾನೆಯಿಂದ ಹೊರಗೆ ಬಿಡುವ ರಾಸಾಯನಿಕ ಮಿಶ್ರಿತ ನೀರು ಸುತ್ತಮುತ್ತಲ ಕೆರೆಗಳಿಗೆ ತಲುಪಿ ಜನ, ಜಾನುವಾರುಗಳಿಗೆ ತೊಂದರೆಯಾಗಿದೆ. ಅಲ್ಲದೇ, ಸುತ್ತಮುತ್ತಲ ಜನ ಕಾರ್ಖಾನೆ ಹೊರಬಿಡುವ ವಿಷದ ಗಾಳಿ ಸೇವಿಸಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಸುಮಾರು ೨೦ ಕ್ಕೂ ಹೆಚ್ಚು ಕೆರೆಗಳು ಮಲೀನಗೊಂಡು ಜಲಚರ, ಪಶು, ಪಕ್ಷಿಗಳು ಸಾವನ್ನಪ್ಪಿವೆ. ರೈತರ ಸಾವಿರಾರು ಎಕರೆ ಕೃಷಿ ಭೂಮಿ ಬಂಜರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇದಲ್ಲದೇ, ಈ ಶಾಹಿ ಎಕ್ಸ್ ಪೋರ್ಟ್ನಿಂದ ಹೊರಬಂದAತಹ ರಾಸಾಯನಿಕ ಮಿಶ್ರಿತ ಧೂಳಿನಿಂದ ಸಣ್ಣ ಕೈಗಾರಿಕಾ ಘಟಕಗಳ ಮೇಲ್ಛಾವಣಿ ಮತ್ತು ಕಬ್ಬಿಣದ ವಸ್ತುಗಳು ಹಾಗೂ ಯಂತ್ರೋಪಕರಣಗಳ ಮೇಲೆ ಪರಿಣಾಮ ಬೀರುತ್ತಿದ್ದು, ಸಣ್ಣ ಕೈಗಾರಿಕೆಗಳು ಮುಚ್ಚುವ ಸ್ಥಿತಿಗೆ ಬಂದಿದೆ. ಅಲ್ಲದೇ, ಈ ಪ್ರದೇಶದ ಜನರು ದಮ್ಮು, ಕೆಮ್ಮು, ಚರ್ಮದ ಕಾಯಿಲೆಗಳಿಗೆ ಗುರಿಯಾಗಿದ್ದಾರೆ. ಕಾರ್ಖಾನೆಯಿಂದ ಕೆಟ್ಟ ವಾಸನೆ ಬರುತ್ತಿದೆ. ಇಲ್ಲಿ ಜನರು ಜೀವಿಸುವುದೇ ಕಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪರಿಸರ ನಾಶ ಮಾಡುತ್ತಿರುವ ಶಾಹಿ ಎಕ್ಸ್ ಪೋರ್ಟ್ ಮಾಲೀಕರನ್ನು ಕೂಡಲೇ ಬಂಧಿಸಬೇಕು. ಪರಿಸರ ನಾಶ ಮಾಡಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾರ್ಖಾನೆಗೆ ಕೂಡಲೇ ಬೀಗ ಹಾಕಬೇಕು. ಪರಿಸರವನ್ನು ಸಂರಕ್ಷಣೆ ಮಾಡದ ಹೊರತೂ ಕಾರ್ಖಾನೆಯ ಬಾಗಿಲನ್ನು ತೆರೆಯಬಾರದು. ರೈತರ ಸಮಾಧಿಗಳ ಮೇಲೆ ಉದ್ಯೋಗ ನೀಡುತ್ತಿರುವ ಗಾರ್ಮೆಂಟ್ಸ್ ಆಡಳಿತಕ್ಕೆ ಧಿಕ್ಕಾರ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ಸತ್ಯನಾರಾಯಣ ಅವರಿಗೆ ಮನವಿ ನೀಡಲು ನಿರಾಕರಿಸಿದ ಪ್ರತಿಭಟನಾಕಾರರು ಸಂಜೆವರೆಗೆ ಪ್ರತಿಭಟನೆ ಮುಂದುವರೆಯಲಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಪಡೆಯಲಿ ಹಾಗೂ ಶಾಹಿ ಗಾರ್ಮೆಂಟ್ಸ್ ನಲ್ಲಿ ಕಲುಷಿತ ನೀರು ಬಿಡದಂತೆ ಶುದ್ಧೀಕರಣ ಘಟಕಗಳು ಮತ್ತು ಇನ್ನಿತರ ಅಗತ್ಯ ಕ್ರಮ ಕೈಗೊಳ್ಳುವವರೆಗೆ ತಾತ್ಕಾಲಿಕವಾಗಿ ಕಾರ್ಖಾನೆಗೆ ಬೀಗ ಮುದ್ರೆ ಹಾಕಲಿ ಅಲ್ಲಿವರೆಗೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*