Cnewstv / 09.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಸ್ತೆಗೆ ಹಾಲು ಸುರಿದು ಹಾಲು ಉತ್ಪಾದಕರ ಪ್ರತಿಭಟನೆ.
ಶಿವಮೊಗ್ಗ : ಉತ್ಪಾದಕರಿಂದ ಹಾಲು ಖರೀದಿ ದರ ಇಳಿಕೆ ಮಾಡಿರುವುದನ್ನು ಖಂಡಿಸಿ ಭಾರತೀಯ ಕೀಸಾನ್ ಸಂಘ ದಕ್ಷಿಣ ಪ್ರಾಂತ್ಯದ ನೇತೃತ್ವದಲ್ಲಿ ಹಾಲು ಉತ್ಪಾದಕ ರೈತರು ಇಂದು ಶಿಮೂಲ್ ಎದುರು ರಸ್ತೆಗೆ ಹಾಲು ಸುರಿದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಈ ಹಿಂದೆ ೨೦೨೩ರ ಅಗಸ್ಟ್ ೧ರಂದು ೧ಲೀಟರ್ಗೆ ೩ ರೂ. ಏರಿಕೆ ಮಾಡಿತ್ತು. ಆಗ ರೈತರಿಗೆ ೩೩.೫೦ ರೂ. ಸಿಗುತ್ತಿತ್ತು. ಮತ್ತೆ ಅಕ್ಟೋಬರ್ ೧ ರಂದು ಪ್ರತಿ ಲೀಟರ್ಗೆ ೧.೨೫ರೂ.ನಷ್ಟು ಕಡಿತವಾಗಿ ೩೧.೭೫ ರೂ. ಸಿಗುತ್ತಿತ್ತು. ಆದರೆ ಈಗ ಮತ್ತೆ ಲೀಟರ್ಗೆ ೨ ರೂ. ಕಡಿಮೆ ೨೯.೭೫ ರೂ. ಕೊಡುತ್ತಿದ್ದಾರೆ. ಕಳೆದ ೮ ತಿಂಗಳಿನಲ್ಲಿ ೩ ರೂ. ಏರಿಕೆ ಮಾಡಿ ೩.೭೦ ಕಡಿತ ಮಾಡಿದ್ದಾರೆ. ಅಂದರೆ ಮೂಲ ದರಕ್ಕಿಂತ ೭೦ ಪೈಸೆ ಕಡಿಮೆಯಾಗಿದೆ ಎಂದು ಪ್ರತಿಭಟನಕಾರರು ತಿಳಿಸಿದರು.
ಹಾಲು ಉತ್ಪಾದಕರು ಸಂಕಷ್ಟ ಎದುರಿಸುತ್ತಿದ್ದಾರೆ. ಪಶು ಆಹಾರ ದರ ಕೂಡ ಏರಿಕೆಯಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಅತಿವೃಷ್ಠಿ ಇಲ್ಲವೇ ಅನಾವೃಷ್ಠಿಗೆ ರೈತರು ತೊಂದರೆಗೆ ಒಳಗಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹೈನುಗಾರಿಕೆಯಿಂದ ಜೀವನ ಸಾಗಿಸೋಣ ಎಂದರೆ ಸರ್ಕಾರ ಹಾಲಿನ ದರದ ಹಾವುಏಣಿ ಆಡವಾಡುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ ಕನಿಷ್ಟ ೩.೫ ಪ್ಯಾಟಿಗೆ ೫೦ ರೂ. ನಿಗಧಿ ಮಾಡಬೇಕು. ಪಶು ಆಹಾರ ದರವನ್ನು ೫೦ ಕೆ.ಜಿ. ಚೀಲಕ್ಕೆ ೮೦೦ ರೂ. ನಿಗಧಿ ಮಾಡಬೇಕು. ಪಶು ಕಾರ್ಖಾನೆಗಳಿಗೆ ಕರ್ನಾಟಕ ರೈತರಿಂದ ಬೆಳೆದ ಮೆಕ್ಕೆಜೋಳವನ್ನು ಖರೀದಿ ಮಾಡಬೇಕು. ಉತ್ಪಾದಕರ ಹಸುಗಳಿಗೆ ಮೇವಿನ ಬೀಜ ನೀಡಬೇಕು. ಕೃತಕ ಗರ್ಭಧಾರಣೆ ಉಚಿತವಾಗಿ ನೀಡಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರು ಮಾತನಾಡಿ, ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಳಿಸಿದ ಹಾಲಿನ ದರವನ್ನು ತಕ್ಷಣವೇ ಏರಿಸಬೇಕು. ಇಲ್ಲದಿದ್ದರೆ, ಗ್ರಾಮಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ೩ ಜಿಲ್ಲೆಗಳ ನೂರಾರು ಹಾಲು ಉತ್ಪಾದಕರು ಭಾಗವಹಿಸಿದ್ದರು.
ಭಾರತೀಯ ಕೀಸನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ್ಯದ ಉಪಾಧ್ಯಕ್ಷ ಕೆ.ಸಿ. ಸದಾಶಿವಪ್ಪ, ಪ್ರವೀಣ್ ಪಟೇಲ್, ಗಂಗಾಧರ ಕಾಸರಗೂಡು, ಭೀಮರಾವ್, ಸುಧಾಪರಮೇಶ್ವರಪ್ಪ, ಅಮೃತಾ ಚಳ್ಳಕೆರೆ ಸೇರಿದಂತೆ ಹಲವರಿದ್ದರು.
#Shimul #Protest #shivamogga
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
https://youtu.be/HzcZLme__LI?si=Hmw2I0twoRmP-zSZ
C News TV Kannada News Online in cnewstv