Breaking News

ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್​ ಅವರಿಗೆ ನೋಟಿಸ್​ ನೀಡಿರುವ ಕ್ರಮವನ್ನ ಖಂಡಿಸಿದರು.
ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್​ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ಮಾಡುತ್ತಿದ್ದಾರೆ. ಪರಿಷತ್ ಕಾರ್ಯಚಟುವಟಿಕೆ ವಿಕೇಂದ್ರಿಕರಣ ಆಗಬೇಕು. ಆದರೆ ಮಹೇಶ್​ ಜೋಶಿ ಅವರು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ತಮ್ಮ ನಿಲುವನ್ನು ಪ್ರಶ್ನಿಸುವವರನ್ನು ದಂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಕ್ಷುಲ್ಲಕ ಕಾರಣಕ್ಕಾಗಿ ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ಅವರ ಸದಸ್ಯತ್ವವನ್ನು ಏಕೆ ರದ್ದು ಮಾಡಬಾರದು ಎಂದು ನೋಟಿಸ್​ ನೀಡಿದ್ದಾರೆ. ಹಾಗಾಗಿ ಸರ್ಕಾರ ತಕ್ಷಣವೇ ಈ ಬಗ್ಗೆ ಗಮನ ಹರಿಸಬೇಕು. ಜೋಶಿ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿ.ಡಿ.ಮಂಜುನಾಥ್, ಕೆ.ಪಿ.ಶ್ರೀಪಾಲ್, ಕೆ.ಎಲ್.ಅಶೋಕ್, ಹೊನ್ನಾಳಿ ಚಂದ್ರಶೇಖರ್ ಸೇರಿದಂತೆ ನೂರಾರು ಜನ ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

*