ಶಿವಮೊಗ್ಗ : ಸರ್ಕಾರದಿಂದ ಅನುದಾನ ಪಡೆಯುವ ಎಲ್ಲಾ ಸಂಸ್ಥೆಗಳು ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಸರ್ಕಾರದ ಶಿಷ್ಟಾಚಾರವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ತಿಳಿಸಿದರು.
ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಷ್ಟಾಚಾರ ಪಾಲನೆ ಮಾಡುವ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಸಭೆ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಶಿಷ್ಟಾಚಾರ ಪಾಲನೆಯನ್ನು ಲಘುವಾಗಿ ಪರಿಗಣಿಸಬಾರದು. ಕಾರ್ಯಕ್ರಮ ಆಯೋಜಿಸುವುದಕ್ಕಿಂತ ಒಂದು ವಾರ ಪೂರ್ವದಲ್ಲೇ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು. ಶಿಷ್ಟಾಚಾರ ಪಾಲಿಸದೆ, ಸ್ಥಳೀಯವಾಗಿ ಸಾರ್ವಜನಿಕರು ಅಥವಾ ಗುತ್ತಿಗೆದಾರರು ಶಂಕುಸ್ಥಾಪನೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ. ಎಲ್ಲಾ ಗುತ್ತಿಗೆದಾರರಿಗೆ ಈ ಕುರಿತು ಮಾಹಿತಿಯನ್ನು ನೀಡಬೇಕು.
ಶಿಷ್ಟಾಚಾರ ಉಲ್ಲಂಘನೆ ಕುರಿತಾಗಿ ಸ್ವೀಕರಿಸಲಾಗಿರುವ ದೂರುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸುವ ಅಧಿಕಾರಿಗಳು ಅದಕ್ಕೆ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಇನ್ನು ಮುಂದೆ ಪ್ರತಿ ತಿಂಗಳು ಶಿಷ್ಟಾಚಾರ ಪಾಲನೆ ಉಲ್ಲಂಘನೆ ಕುರಿತಾಗಿ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
C News TV Kannada News Online in cnewstv