Breaking News

ಕೋವಿಡ್ ಕೇರ್ ಸೆಂಟರ್‍ಗಳಲ್ಲಿ 2225 ಬೆಡ್ ವ್ಯವಸ್ಥೆ

 

ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯ ಪಡೆಯಲು ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಕರೋನಾ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ವಾಜಪೇಯಿ ಆರೋಗ್ಯ ಶ್ರೀ ಯೋಜನೆಯಡಿ ನೋಂದಣಿಯಾಗಿರುವ 21ಆಸ್ಪತ್ರೆಗಳಲ್ಲಿ ಕರೋನಾ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಈ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳು ಸೇರಿದಂತೆ ವೈದ್ಯಕೀಯ ಸೌಲಭ್ಯಗಳ ಕುರಿತು ಈಗಾಗಲೇ ನೀಡಿರುವ ಮಾಹಿತಿಯನ್ನು ಗೂಗಲ್ ಶೀಟ್‍ನಲ್ಲಿ ನವೀಕರಿಸಬೇಕು. ಕೆಪಿಎಂಎ ವೈದ್ಯಾಧಿಕಾರಿಗಳ ತಂಡ ಈ ಎಲ್ಲಾ ಆಸ್ಪತ್ರೆಗಳಿಗೆ ಭೇಟಿ ನೀಡಿ ಲಭ್ಯ ಸೌಲಭ್ಯಗಳ ಪರಿಶೀಲನೆ ನಡೆಸಿ ಬುಧವಾರದ ಒಳಗಾಗಿ ವರದಿಯನ್ನು ಸಲ್ಲಿಸಬೇಕು ಎಂದು ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಇದುವರೆಗೆ 151 ಕರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಪ್ರಸ್ತುತ 45ಮಂದಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೆಡ್‍ಗಳ ಲಭ್ಯತೆಯನ್ನು 250ಕ್ಕೆ ಹೆಚ್ಚಿಸಲಾಗುತ್ತಿದೆ. ಒಟ್ಟು 80ವೆಂಟಿಲೇಟರ್‍ಗಳು ಸೇರಿದಂತೆ ಎಲ್ಲಾ ಅಗತ್ಯ ಮೂಲಸೌಲಭ್ಯ ಇಲ್ಲಿ ಲಭ್ಯವಿದೆ. ಒಂದು ವೇಳೆ ಕರೋನಾ ಪಾಸಿಟಿವ್ ಪ್ರಕರಣ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು. ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿನ ಶೇ.50ರಷ್ಟು ಬೆಡ್‍ಗಳನ್ನು ಅಂತಹ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಹೇಳಿದರು.

ಕೋವಿಡ್ ಕೇರ್ ಸೆಂಟರ್: ಸರ್ಕಾರದ ಮಾರ್ಗಸೂಚಿ ಪ್ರಕಾರ ಯಾವುದೇ ರೋಗ ಲಕ್ಷಣಗಳಿಲ್ಲದ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಹಾಸ್ಟೆಲ್‍ಗಳು ಒಳಗೊಂಡಂತೆ ಕೋವಿಡ್ ಕೇರ್ ಸೆಂಟರ್‍ಗಳನ್ನು ಈಗಾಗಲೇ ಗುರುತಿಸಲಾಗಿದೆ. ಒಟ್ಟು 2225 ಬೆಡ್ ಸೌಲಭ್ಯಗಳಿರುವ ಕೋವಿಡ್ ಕೇರ್ ಸೆಂಟರ್‍ಗಳನ್ನು ಗುರುತಿಸಿ ಸಜ್ಜುಗೊಳಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ ಕರೋನಾ ನಿಯಂತ್ರಣದಲ್ಲಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಅಗತ್ಯ ಬಿದ್ದರೆ ಖಾಸಗಿ ವೈದ್ಯರ ಸೇವೆಯನ್ನು ಪಡೆದುಕೊಳ್ಳಲಾಗುವುದು. ಯಾವುದೇ ಆಸ್ಪತ್ರೆಗಳು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ದೀರ್ಘ ಕಾಲದ ರಜೆ ನೀಡಬಾರದು. ರಜೆ ನೀಡುವ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ಒದಗಿಸಬೇಕು. ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆಯನ್ನು ಮೆಗ್ಗಾನ್‍ನಲ್ಲಿಯೇ ನೀಡಲು ಆದ್ಯತೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಪಾಸಿಟಿವ್ ವ್ಯಕ್ತಿಯನ್ನು ಕಳುಹಿಸುವ ಮೊದಲು ತಜ್ಞ ಸಮಿತಿಯಿಂದ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*