ಶಿವಮೊಗ್ಗ : ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದಾಗಿ ಜಲಾಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಭದ್ರಾ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದಾಗಿ ಹರಿದು ಬರುತ್ತಿರುವ ನೀರನ್ನು ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಪ್ರಸ್ತುತ ಭದ್ರಾ ಜಲಾಶಯಕ್ಕೆ 50 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, 50 ಸಾವಿರ ಕ್ಯೂಸೆಕ್ ನೀರನ್ನೂ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭದ್ರಾವತಿಯಲ್ಲಿರುವ ಭದ್ರಾ ಸೇತುವೆ ನೀರಿನಲ್ಲಿ ಮುಳುಗಿದ್ದು, ಈ ಸೇತುವೆಯ ಮೇಲೆ ವಾಹನ ಹಾಗೂ ಜನ ಸಂಚಾರವನ್ನು ಪೊಲೀಸರು ನಿರ್ಭಂಧಿಸಿದ್ದಾರೆ..

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಒಂದು ವೇಳೆ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಟ್ಟಿದ್ದೇ ಆದಲ್ಲಿ ಭದ್ರಾವತಿ ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಕಳೆದ ಬಾರಿಯೂ ಭದ್ರಾ ಪ್ರವಾಹದಿಂದ ಭದ್ರಾವತಿಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಈ ಬಾರಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಭದ್ರಾವತಿ ತಾಲೂಕು ಆಡಳಿತ ತಗ್ಗು ಪ್ರದೇಶದ ಮನೆಗಳಲ್ಲಿದ್ದವರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ. ಜೊತೆಗೆ ಗಂಜಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ.

C News TV Kannada News Online in cnewstv