ಶಿವಮೊಗ್ಗ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಲ್ಲೆಯ 271ಗ್ರಾಮ ಪಂಚಾಯತ್ಗಳ ಪೈಕಿ 201 ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್ಗೆ ತಲಾ 20ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ವಿಧಾನಗಳನ್ನು ಸಹ ಇಲ್ಲಿ ಅಳವಡಿಸಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.
ಉದ್ಯೋಗ ಖಾತ್ರಿ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ಇದೀಗ ಪ್ರತಿ ಮನೆಯ ಬಚ್ಚಲು ನೀರಿನ ಸಮರ್ಪಕ ವಿಲೇವಾರಿಗೆ ಬಚ್ಚಲು ಗುಂಡಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತ್ಗಳಲ್ಲಿ ವೈಜ್ಞಾನಿಕವಾದ ಕಸ ವಿಲೇವಾರಿಯಿಂದಾಗಿ ಪರಿಸರವನ್ನು ಸ್ವಚ್ಛವಾಗಿಡಲು ಸಾಧ್ಯವಾಗಲಿದೆ ಮಾತ್ರವಲ್ಲ, ಸ್ಥಳೀಯವಾಗಿ ಗ್ರಾಮ ಪಂಚಾಯತ್ಗಳಿಗೆ ಆದಾಯ ಸಂಗ್ರಹಿಸಲು ಸಹ ಅವಕಾಶವಾಗಲಿದೆ ಎಂದರು.
C News TV Kannada News Online in cnewstv