ಶಿವಮೊಗ್ಗ : ಕೃಷಿ ಮಸೂದೆ ಬಗ್ಗೆ ಮೊದಲು 2012ರಲ್ಲಿ ಚರ್ಚೆ ಮಾಡಿದ್ದೇ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ಕಾಂಗ್ರೆಸ್ ಗೆ ಶಿಫಾರಸ್ಸು ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಕಾಂಗ್ರೆಸ್ ಚರ್ಚಿಸಿದ್ದ ಮಸೂದೆಯನ್ನೇ ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಮಸೂದೆ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ.ಕೂಡಲೇ ರಾಜ್ಯದ ಕಾಂಗ್ರೆಸ್ ನಾಯಕರು ಅಂದು ಕೃಷಿ ಮಸೂದೆ ಬಗ್ಗೆ ಪ್ರಸ್ತಾಪಿಸಿದ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ನಾಯಕರನ್ನು ಒತ್ತಾಯಿಸಲಿ ಎಂದು ಆಗ್ರಹಿಸಿದರು.
ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ. ಕೃಷಿ ಮಸೂದೆ ಬಗ್ಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೇಳುತ್ತಿರುವ ಸುಳ್ಳನ್ನು ರೈತರು ನಂಬಬಾರದು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಯಡಿಯೂರಪ್ಪನವರು ಕೃಷಿ ಮಸೂದೆ ಜಾರಿಗೆ ತಂದಾಗ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವಾಗ ಹಸಿರು ಶಾಲು ಹೊದ್ದಿದ್ದರು. ಇದೀಗ ಕೇಸರಿ ಶಾಲು ಹೊದ್ದಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು.
ಯಡಿಯೂರಪ್ಪ ಹಸಿರು ಶಾಲು ಹೊದ್ದಿದ್ದಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಹಸಿರು ಶಾಲೂ ಇಲ್ಲ ಕೇಸರಿ ಶಾಲೂ ಇಲ್ಲ ಎಂದು ವ್ಯಂಗ್ಯವಾಡಿದ ಈಶ್ವರಪ್ಪ ಅವರು. ಸಿದ್ದರಾಮಯ್ಯ ಅವರಿಗೆ ಟ್ವೀಟರ್ ನಲ್ಲಿ ಟ್ವೀಟ್ ಮಾಡಿ ಟೀಕೆ ಮಾಡುವುದೇ ಕೆಲಸ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
C News TV Kannada News Online in cnewstv