ಶಿವಮೊಗ್ಗ : ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ನಿರ್ಮಾಣ ಸಾಮಾಗ್ರಿ ಅಂಗಡಿ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನು ನಿರ್ಬಂಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮೈದಾನ ಇಲ್ಲವೇ ತೆರೆದ ಪ್ರದೇಶದಲ್ಲಿ ಮಾತ್ರ ಸಗಟು ತರಕಾರಿ, ಹಣ್ಣು, ಹೂ ವ್ಯಾಪಾರ ನಡೆಸಲು ಅನುಮತಿ ಇದೆ. ಮುಂಗಾರು ಕೃಷಿ ಪೂರ್ವ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ. ಎಲ್ಲಾ ರೀತಿಯ ಕೈಗಾರಿಕೆ, ಸಂಸ್ಥೆಗಳು ಕಾರ್ಯನಿರ್ವಹಿಸಬಹುದು. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವವರಿಗೆ ಅಧಿಕೃತವಾದ ಐಡಿ ಕಾರ್ಡ್ ನೀಡಿರಬೇಕು. ಮದುವೆ ಸಮಾರಂಭಗಳಿಗೆ ತಹಶೀಲ್ದಾರ್ ಕಚೇರಿಯಿಂದ ಅನುಮತಿ ಪಡೆದು ಗರಿಷ್ಟ 50ಮಂದಿ ಮೀರದಂತೆ ನಿರ್ವಹಿಸಬೇಕು. ರಾಜ್ಯದೊಳಗೆ ವ್ಯಕ್ತಿಗಳ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಮುಕ್ತ ಅವಕಾಶವಿದೆ ಎಂದು ಹೇಳಿದರು.
ವಾರಾಂತ್ಯ ಕಫ್ರ್ಯೂ: ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಸಂಪೂರ್ಣ ಕಫ್ರ್ಯೂ ಇರಲಿದ್ದು, ಈ ಅವಧಿಯಲ್ಲಿ ಬೆಳಿಗ್ಗೆ 6ರಿಂದ 10ರವರೆಗೆ ದಿನಸಿ, ತರಕಾರಿ ಹಾಲು ಅಂಗಡಿಗಳು ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆದಿರುತ್ತದೆ. ಮೇ 4ರವರೆಗೆ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 6ರವರೆಗೆ ಕಫ್ರ್ಯೂ ಜಾರಿಯಲ್ಲಿರಲಿದೆ ಎಂದರು.
C News TV Kannada News Online in cnewstv