Cnewstv.in / Shivamogga / 05.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕಠಿಣ ಲಾಕ್ಡೌನ್ ನಿಯಮಾವಳಿಗಳು ಜೂನ್ 14ರವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಸ್ತುತ ಇರುವ ಲಾಕ್ಡೌನ್ ನಿಯಮಾವಳಿಗಳು ಮುಂದಿನ ಒಂದು ವಾರ ಕಾಲ ಜಾರಿಯಲ್ಲಿರಲಿವೆ. ದಿನಸಿ, ತರಕಾರಿಯಂತಹ ಅಗತ್ಯ ಸಾಮಾಗ್ರಿಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಅನುಮತಿ ನೀಡಲಾಗಿರುವ ಕೈಗಾರಿಕಾ ಉತ್ಪನ್ನಗಳ ಉತ್ಪಾದನೆಗೆ ಅವಕಾಶವಿದೆ. ಮದ್ಯ ಮಾರಾಟ (ಪಾರ್ಸೆಲ್) ಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶ ನೀಡಲಾಗಿದೆ. ಎಪಿಎಂಸಿಯಲ್ಲಿ ಸರಕು ಸಾಮಾಗ್ರಿಗಳನ್ನು ಸರಕು ವಾಹನಗಳಿಂದ ಇಳಿಸಲು ಮತ್ತು ಲೋಡ್ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಹೇಳಿದರು.
ಜಿಲ್ಲೆಯಲ್ಲಿ ನಗರ ಪ್ರದೇಶ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶದಲ್ಲೂ ಕರೋನಾ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ. ಶೇ.47ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.18ಕ್ಕೆ ಇಳಿದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದರೆ ಇದನ್ನು ಶೇ.5ಕ್ಕೆ ಇಳಿಸುವ ಗುರಿಯನ್ನು ಹೊಂದಲಾಗಿದ್ದು ಎಲ್ಲರ ಸಹಕಾರದಿಂದ ಮಾತ್ರ ಇದು ಸಾಧ್ಯವಿದೆ. ಜಿಲ್ಲೆಯ ಜನತೆ ಲಾಕ್ಡೌನ್ಗೆ ಉತ್ತಮವಾಗಿ ಸ್ಪಂದಿಸಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಕಾರಣದಿಂದ ಕರೋನಾ ನಿಯಂತ್ರಣ ಮಾಡಲು ಸಾಧ್ಯವಾಗಿದೆ. ಮುಂದಿನ ಒಂದು ವಾರ ಕಾಲ ಇದೇ ರೀತಿ ಸಹಕಾರ ನೀಡುವಂತೆ ಅವರು ಕೋರಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv