Cnewstv.in / 20.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039
ಶಿವಮೊಗ್ಗ : ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರಗಳಿಗೆ ಪ್ರತ್ಯೇಕವಾಗಿ ಲಾಕ್ಡೌನ್ ಮಾರ್ಗಸೂಚಿ ಹೊರಡಿಸಲಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಕರೋನಾ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆಯಿದ್ದರೂ, ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ವ್ಯಾಪಾರ ವಹಿವಾಟುಗಳಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ.
ಸಗಟು ತರಕಾರಿ ಮತ್ತು ದಿನಸಿ ವ್ಯಾಪಾರ, ಗಾಂಧಿಬಜಾರ್ ಸಗಟು ವ್ಯಾಪಾರಿಗಳಿಗೆ ಮಧ್ಯಾಹ್ನ 12ಗಂಟೆಯವರೆಗೆ, ಸಿಮೆಂಟ್, ಸ್ಟೀಲ್, ಹಾರ್ಡ್ವೇರ್, ಫೊಟೋ ಸ್ಟುಡಿಯೊ, ಚಿನ್ನ ಗಿರವಿ ಅಂಗಡಿ, ಟೈಲರ್ಗಳಿಗೆ, ಬಂಗಾರ ಕೆಲಸ ಮಾಡುವವರು ಮುಂತಾದ ಕ್ಷೇತ್ರದವರಿಗೆ ಮಧ್ಯಾಹ್ನ 2ಗಂಟೆಯವರೆಗೆ ಅವಕಾಶ ನೀಡಲಾಗುವುದು. ಬಟ್ಟೆ ವ್ಯಾಪಾರ ಮತ್ತು ಚಿನ್ನದ ವ್ಯಾಪಾರಕ್ಕೆ ಅವಕಾಶವಿರುವುದಿಲ್ಲ. ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿದೆ ಆದರೆ ಬೀದಿ ಬದಿ ಆಹಾರ ಉತ್ಪನ್ನ ಮಾರಾಟಕ್ಕೆ ಅನುಮತಿ ಇಲ್ಲ. ವಾಕಿಂಗ್, ಯೋಗ ಇತ್ಯಾದಿ ವ್ಯಾಯಾಮ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಮಾರ್ಗಸೂಚಿ ಪಾಲಿಸಿ: ಲಾಕ್ಡೌನ್ ಸಡಿಲಿಕೆ ಮಾಡಲಾಗಿದ್ದರೂ, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಜನರು ಪಾಲಿಸದಿದ್ದರೆ, ಆ ಅಂಗಡಿ ಮಾಲಿಕರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಅಂಗಡಿಗಳ ಮುಂದೆ ಜನ ಜಂಗುಳಿ ಸೇರಿದ್ದರೆ ಅಂತಹ ಅಂಗಡಿಗಳನ್ನು ಮುಚ್ಚಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv